ಶುಕ್ರವಾರ, ಮಾರ್ಚ್ 31, 2023

ಚುನಾವಣಾ ನೀತಿ ಸಂಹಿತೆ ಜಾರಿ; ದೇವಸ್ಥಾನ, ಇತರೆ ಧಾರ್ಮಿಕ ಸ್ಥಳಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳು ನಿರ್ಬಂಧ ಬಳ್ಳಾರಿ,ಮಾ.31(ಕರ್ನಾಟಕ ವಾತೆರ್ ): ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ-2023ರ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ನಿಟ್ಟಿನಲ್ಲಿ, ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಮಠ, ಮಂದಿರ, ಜೈನ್ ಬಸದಿಗಳಲ್ಲಿ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಸಮುದಾಯ ಭವನ, ಯಾತ್ರಿನಿವಾಸ ಪ್ರದೇಶ, ಕಲ್ಯಾಣ ಮಂಟಪ ಜಾಗ ಪ್ರದೇಶದಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಎಂ.ಹೆಚ್.ಪ್ರಕಾಶ್ ಅವರು ತಿಳಿಸಿದ್ದಾರೆ. ರಾಜಕೀಯ ಚಟುವಟಿಕೆಗಳಿಗೆ ದೇವಸ್ಥಾನದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯ ಭವನ, ಖಾಲಿ ಜಾಗ, ದೇವಸ್ಥಾನದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ. ದೇವಸ್ಥಾನದಲ್ಲಿ ರಾಜಕೀಯ ವ್ಯಕ್ತಿಗಳು ಯಾವುದೇ ಸಮಾರಂಭ, ಸಭೆ, ಇನ್ನಿತರ ರಾಜಕೀಯ ಚಟುವಟಿಕೆಗಳು ನಡೆಸಲು ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣದಲ್ಲಿ ರಾಜಕೀಯ ವ್ಯಕ್ತಿಗಳಿಂದ ಅನವಶ್ಯಕ ಕಾರ್ಯಕ್ರಮವನ್ನು ಆಯೋಜಿಸಿ ಊಟದ ವ್ಯವಸ್ಥೆಯನ್ನು ಮಾಡಿ ಹಂಚುವುದಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ. ಚುನಾವಣೆ ಸಂಧರ್ಭದಲ್ಲಿ ರಾಜಕೀಯ ವ್ಯಕ್ತಿಗಳ ವ್ಯಕ್ತಿಗಳು ತಮ್ಮ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇತರೆ ಧಾರ್ಮಿಕ ಸ್ಥಳಗಳಲ್ಲಿ ಭೇಟಿ ನೀಡಿ ಆವರಣದಲ್ಲಿ ಸಭೆ ಸಮಾರಂಭ ಅಥವಾ ಇನ್ನಿತರೆ ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಜಿಲ್ಲಾ ಚುನಾವಣಾಧಿಕಾರಿಗಳ ಆದೇಶವನ್ನು ದಿಕ್ಕರಿಸಿ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿದಲ್ಲಿ ಧಾರ್ಮಿಕ ಸಂಸ್ಥೆಗಳು (ತಡೆಗಟ್ಟುವಿಕೆ ಅಥವಾ ದುರುಪಯೋಗ) ಕಾಯ್ದೆ 1988 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ