ಮಂಗಳವಾರ, ಸೆಪ್ಟೆಂಬರ್ 26, 2023
ಶೀಘ್ರದಲ್ಲಿ ಆಶ್ರಯ ಮನೆಗಳ ಹಸ್ತಾಂತರ
ವಸತಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಭರವಸೆ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ನಗರದ ಮುಂಡರಗಿ ಆಶ್ರಯ ಕಾಲೋನಿಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಭರವಸೆ ನೀಡಿದರು.
ಇಂದು ಅವರು ಬೆಳಗಿನಿಂದ ಸಂಜೆಯವರೆಗೆ ಸಂಡೂರು ಸೇರಿದಂತೆ ವಿವಿಧ ಗಣಿ ಬಾದಿತ ಹಳ್ಳಿಗಳು ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯಗಳಿಗೆ ಬೇಟಿ ನೀಡಿ ಪರಿಶೀಲಿಸಿ ಜೊತೆಗೆ ಸ್ಥಳೀಯರನ್ನು ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಆಶ್ರಯ ಕಾಲೋನಿಯ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಕಾಮಗಾರಿ ಗುಣಮಟ್ಟ ಕಾಯ್ದುಕೊಂಡಿರುವ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಹೊರ ಹೊಲಯದ ಮುಂಡರಗಿ ಆಶ್ರಯ ಕಾಲೋನಿಯಲ್ಲಿ ಒಟ್ಟು 56 ಎಕರೆಯಲ್ಲಿ 365 ಕೋಟಿ ರೂ. ಗಳ ವೆಚ್ಚದಲ್ಲಿ 5616 ಮನೆಗಳ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುತ್ತಿದ್ದು, ಮೊದ ಹಂತದಲ್ಲಿ 2592 ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಅದರಲ್ಲಿ ಈಗಾಗಲೇ 365 ಮನೆಗಳು ಪೂರ್ಣಗೊಂಡಿದ್ದು, 1000 ಮನೆಗಳು ನಿರ್ಮಾಣ ಹಂತದಲ್ಲಿವೆ ಮತ್ತು ಉಳಿದಿರುವುಗಳದ್ದು ಅಡಿಪಾಯ ಆಗಿದೆ, ಪೂರ್ಣಗೊಂಡಿರುವ ಮನೆಗಳನ್ನು ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕೂಡ್ಲಿಗಿ ಶಾಸಕ ಎನ್.ಟಿ ಶ್ರೀನಿವಾಸ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
*ಅಮಾನತು:*
ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಭೇಟಿ ಸಂದರ್ಭದಲ್ಲಿ ಗೈರು ಹಾಜರಾದ ಬಳ್ಳಾರಿಯ ಕೊಳಗೇರಿ ಮಂಡಳಿಯ ಸಹಾಯಕ ಅಭಿಯಂತರ ಕೃಷ್ಣಾ ರೆಡ್ಡಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲು ಸಚಿವರು ಆದೇಶಿಸಿದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)









ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ