ಸೋಮವಾರ, ಅಕ್ಟೋಬರ್ 2, 2023
ಗ್ರಾಮದ ಸ್ವಚ್ಛತೆಗೆ ಸಾರ್ವಜನಿಕರು ಸಹಕರಿಸಲು ಕರೆ: ಗಾದಿಲಿಂಗಪ್ಪ
ಬಳ್ಳಾರಿ,ಅ.02(ಕರ್ನಾಟಕ ವಾರ್ತೆ):
ಪ್ರತಿಯೊಬ್ಬ ನಾಗರಿಕರು ವಾರದಲ್ಲಿ ಎರಡು ಗಂಟೆಗಳ ಕಾಲ ಸ್ವಚ್ಛತಾ ಶ್ರಮದಾನ ಮಾಡಿದರೆ ಮಹಾತ್ಮ ಗಾಂಧೀಜಿಯವರು ಕಂಡ ಸ್ವಚ್ಛ ಭಾರತ ಕನಸು ನನಸಾಗುವುದು. ಈ ನಿಟ್ಟಿನಲ್ಲಿ ಗ್ರಾಮ ಸ್ವಚ್ಛತೆಗಾಗಿ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಕೊಳಗಲ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗಾದಿಲಿಂಗಪ್ಪ ಕರೆ ನೀಡಿದರು.
ಅವರು ಇಂದು, ಕೇಂದ್ರ ಸಂವಹನ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಳಗಲ್ಲು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗ್ರಾಮ ಪಂಚಾಯತಿ ಕೊಳಗಲ್ಲು ಇವರುಗಳ ಸಂಯುಕ್ತಾಶ್ರಯದಲ್ಲಿ ಗ್ರಾಮದ ಈರಣ್ಣ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತೆಯೇ ಸೇವೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸ್ವಚ್ಛ ಭಾರತ ಜಿಲ್ಲಾ ಸಂಯೋಜಕರಾದ ಮರಿಸ್ವಾಮಿ ಅವರು ಮಾತನಾಡಿ, ಗ್ರಾಮಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸüಬೇಕು. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಶಾಷಾವಲಿ ಮಾತನಾಡಿ ಪ್ರತಿಯೊಬ್ಬ ನಾಗರಿಕರು ಹಸಿ ಕಸ ಒಣ ಕಸವನ್ನು ಬೇರ್ಪಡಿಸಿ ಪಂಚಾಯಿತಿಯವರು ಸ್ವಚ್ಛತಾ ವಾಹನಗಳಿಗೆ ತಪ್ಪದೇ ಕಸವನ್ನು ಕೊಡಬೇಕು ಎಂದು ವಿನಂತಿಸಿದರು.
ಕೇಂದ್ರ ಸಂವಹನ ಇಲಾಖೆ ವತಿಯಿಂದ ರಂಗೋಲಿ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ಜಾಥಾದಲ್ಲಿ ಎಲ್ಲಾ ಶಾಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.
ಗ್ರಾಮದಲ್ಲಿ ಸ್ವಚ್ಛತೆಯ ಕುರಿತು, ಸಂಗೀತ ಮತ್ತು ನಾಟಕ ವಿಭಾಗದ ಕಲಾತಂಡದವರಿಂದ ಜನಪದ ಗೀತೆಗಳ ಮುಖಾಂತರ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಹೊನ್ನೂರಪ್ಪ, ರಾಮಕೃಷ್ಣ, ಪಲ್ಲವಿ ಈರಣ್ಣ, ಸ್ಥಳೀಯ ವೈದ್ಯಾಧಿಕಾರಿ ಡಾ.ದಿವ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ, ಕೇಂದ್ರ ಸಂವಹನ ಇಲಾಖೆಯ ಎನ್.ರಾಮಕೃಷ್ಣ ಸೇರಿದಂತೆ ಸ್ಥಳೀಯ ಮುಖಂಡರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ