ಗುರುವಾರ, ನವೆಂಬರ್ 23, 2023

ವಿವಿಧೆಡೆ ದಾಳಿ; ಬಾಲ ಕಾರ್ಮಿಕರ ರಕ್ಷಣೆ

ಬಳ್ಳಾರಿ,ನ.23(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್‍ಲೈನ್ ಸಹಯೋಗದೊಂದಿಗೆ ಗುರುವಾರದಂದು, ನಗರದಲ್ಲಿ ವಿವಿಧೆಡೆ ದಾಳಿ ನಡೆಸಿ 02 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಅವರು ತಿಳಿಸಿದ್ದಾರೆ. ಬಳ್ಳಾರಿ ನಗರದ ಗುಗ್ಗರಹಟ್ಟಿ, ಈದ್ಗಾ ದರ್ಗಾ ಹತ್ತಿರ ಮತ್ತು ವಿದ್ಯಾನಗರ ಮಂತಾದ ಸ್ಥಳಗಳಲ್ಲಿನ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 02 ಬಾಲಕಾರ್ಮಿಕ ಮಕ್ಕಳು ಮತ್ತು 02 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರಲು ಸಂಬಂಧಿಸಿದ ಇಲಾಖೆಗೆ ಒಪ್ಪಿಸಲಾಗಿದೆ. ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೌನೇಶ್ ಅವರು ತಿಳಿಸಿದ್ದಾರೆ. ಈ ಟಾಸ್ಕ್‍ಫೋರ್ಸ್ ಸಮಿತಿಯಲ್ಲಿ ವಿಶೇಷವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ, ಬಳ್ಳಾರಿ ತಹಶೀಲ್ದಾರ ಗುರುರಾಜ್, ಕಾರ್ಮಿಕ ನಿರೀಕ್ಷಕ ರವಿದಾಸ್, ಸಹಾಯಕ ಶಿಶು ಅಭಿವೃದ್ದಿ ಯೋಜನೆ ಅಧಿಕಾರಿ ನಾಗಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆಯ ಶಿವಪ್ಪ,, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಬಿ.ಹಿರೇಮಠ್, ಮಲ್ಲಿಕಾರ್ಜುನ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಬೋಜರಾಜ್, ಮಕ್ಕಳ ಸಹಾಯವಾಣಿಯ ಸಂಯೋಜಕ ಮಂಜುನಾಥ ಮತ್ತು ಚೈಲ್ಡ್‍ಲೈನ್ ಸಿಬ್ಬಂದಿಗಳಾದ ಕಾರ್ತಿಕ್, ಅರುಣ್ ಹಾಜರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ