ಗುರುವಾರ, ಜನವರಿ 18, 2024

ಮಕ್ಕಳಲ್ಲಿ ಉದ್ಯೋಗದ ಆಶಾಭಾವನೆಯಿಂದ ಫಲಿತಾಂಶ ಸುಧಾರಣೆ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜ.18(ಕರ್ನಾಟಕ ವಾರ್ತೆ): ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕಲಿಕೆ ಬಗ್ಗೆ ಆಸಕ್ತಿ ಮೂಡಿಸಬೇಕು. ಇದರಿಂದ ಜೀವನದ ಭದ್ರತೆ ಮತ್ತು ಉದ್ಯೋಗದ ಬಗ್ಗೆ ಆಶಾ ಭಾವನೆ ಮೂಡಿ ಫಲಿತಾಂಶ ಸುಧಾರಣೆಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಎಸ್.ಎಸ್.ಎಲ್.ಸಿ ನಂತರ ಮುಂದೇನು: ವೃತ್ತಿ ಮಾರ್ಗದರ್ಶನ ಬಗ್ಗೆ ಮೋಕಾ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಬಳ್ಳಾರಿ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ನೀಡಿ ಮಾತನಾಡಿದರು. ಇತ್ತೀಚೆಗೆ ಬೆಂಗಳೂರಿನ ನಿರ್ಮಾಣ್ ಸಂಸ್ಥೆ ವತಿಯಿಂದ ಎಸ್.ಎಸ್.ಎಲ್.ಸಿ ನಂತರ ಮುಂದೇನು: ವೃತ್ತಿ ಮಾರ್ಗದರ್ಶನ ಬಗ್ಗೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಲಾಗಿತ್ತು. ತರಬೇತಿ ಹೊಂದಿರುವವರನ್ನು ಜ.17 ರಿಂದ ಜ.20 ರ ವರೆಗೆ ನಿಯೋಜಿಸಿದ ಶಾಲೆಗಳಿಗೆ ಭೇಟಿ ನೀಡಿ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದರು. ತರಬೇತಿ ಕಾರ್ಯಕ್ರಮ ಆಯೋಜನೆಯಿಂದ ಮಕ್ಕಳು ಅಭ್ಯಾಸ ಮಾಡುತ್ತಿರುವ ಬಗ್ಗೆ ಕಂಡುಬರುತ್ತಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು. ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ತರಬೇತಿಯು ಹಲವು ವೃತ್ತಿಗಳ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವುದರ ಮೂಲಕ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಲಿದೆ. ಜೊತೆಗೆ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯಾಗುವುದೆಂಬ ಆಶಯದ ನುಡಿ ನುಡಿದರು. ಈ ಸಂದರ್ಭದಲ್ಲಿ ತರಬೇತಿ ಹೊಂದಿದ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇವರಿಂದ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಮಕ್ಕಳಿಗೆ ತರಬೇತಿ ನೀಡಲಾಯಿತು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ