ಭಾನುವಾರ, ಜನವರಿ 21, 2024
ಮೂರು ಜಿಲ್ಲೆಯ ನ್ಯಾಯಾಧೀಶರಿಗೆ “ಒಂದು ದಿನದ ಪುನಶ್ಚೇತನ ತರಬೇತಿ” ಕಾರ್ಯಗಾರ
ಬಳ್ಳಾರಿ,ಜ.21(ಕರ್ನಾಟಕ ವಾರ್ತೆ):
ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪ್ರಕರಣಗಳನ್ನು ತ್ವರಿತ ವಿಲೇವಾರಿ ಮಾಡುವ ನಿಟ್ಟಿನಲ್ಲಿ ನ್ಯಾಯಾಧೀಶರ ಪಾತ್ರ ಮುಖ್ಯವಾಗಿದ್ದು, ಪುನಶ್ಚೇತನ ತರಬೇತಿ ಶಿಬಿರವು ನ್ಯಾಯಾಧೀಶರಿಗೆ ಅನುಕೂಲವಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದ ಸಭಾಂಗಣದಲ್ಲಿ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ನ್ಯಾಯಾಧೀಶರಿಗೆ ಭಾನುವಾರ ಹಮ್ಮಿಕೊಂಡಿದ್ದ “ಒಂದು ದಿನದ ಪುನಶ್ಚೇತನ ತರಬೇತಿ” ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕುಮಾರ್ ಬಿ.ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಳ್ಳಾರಿಯಲ್ಲಿ ಶಿಬಿರವನ್ನು ಹಮ್ಮಿಕೊಂಡಿದ್ದು, ಖುಷಿಯ ವಿಚಾರವಾಗಿದೆ. ಬೆಂಗಳೂರಿನ ಮಧ್ಯಸ್ಥಿಕೆ ಕೇಂದ್ರದ ನ್ಯಾಯಾಧೀಶರಾದ ಸುಧಾ.ಎಸ್.ಎನ್ ಮತ್ತು ವೈಶಾಲಿ ಹೆಗಡೆ ಅವರು ತರಬೇತಿ ನೀಡಲಿದ್ದು, ಈ ಕಾರ್ಯಗಾರವನ್ನು ಎಲ್ಲಾ ನ್ಯಾಯಾಧೀಶರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನಿ, ರಾಯಚೂರು ಜಿಲ್ಲಾ ನ್ಯಾಯಾಲಯದ ಒಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಮ್.ಜಗದೀಶ್ವರ್, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ನ್ಯಾಯಾಧೀಶರು ಹಾಗೂ ಬಳ್ಳಾರಿ ನ್ಯಾಯಾಲಯದ ವಕೀಲರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ನ್ಯಾಯಾಲಯದ ವಕೀಲರು ಹಾಗೂ ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿಯಾದ ತ್ರಿವೇಣಿ ಪತ್ತಾರ್ ಅವರು ನಿರೂಪಣೆ ಮಾಡಿದರು.
ಹೊಸಪೇಟೆ ನ್ಯಾಯಾಲಯದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರೆಹಮಾನ್ ನಂದಗಡಿ ವಂದನಾರ್ಪಣೆ ಮಾಡಿದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ