ಶುಕ್ರವಾರ, ಫೆಬ್ರವರಿ 23, 2024
ಫೆ.26, 27ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ; ಭಾಗವಹಿಸಲು ಅವಕಾಶ
ಬಳ್ಳಾರಿ,ಫೆ.23(ಕರ್ನಾಟಕ ವಾರ್ತೆ):
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ
ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಇತ್ಯಾದಿ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಈ ಸಮಿತಿಯ ಮಾರ್ಗದರ್ಶನದಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ.
ಈ ಮೇಳದಲ್ಲಿ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ವೆಬ್ಸೈಟ್ (ಸ್ಕಿಲ್ ಕನೆಕ್ಟ್ ಪೋರ್ಟಲ್)ಸ https://udyogamela.skillconnect.kaushalkar.com ನಲ್ಲಿ ಮುಂಚಿತವಾಗಿ ನೋಂದಣಿ ಮಾಡುವುದರ ಮೂಲಕ ಭಾಗವಹಿಸಬಹುದಾಗಿದೆ.
ಬಳ್ಳಾರಿ ಜಿಲ್ಲೆಯ ಎಲ್ಲಾ ನಿರುದ್ಯೋಗಿ ಯುವಕ ಯುವತಿಯರು ವೆಬ್ಸೈಟ್ನಲ್ಲಿ ನೋಂದಾಯಿಸುವುದರ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ