ಸೋಮವಾರ, ಏಪ್ರಿಲ್ 15, 2024

ಸಿರುಗುಪ್ಪ: ವಿವಿಧೆಡೆ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಮತದಾನ ಜಾಗೃತಿ

ಬಳ್ಳಾರಿ,ಏ.15(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಹಾಗೂ ನೈತಿಕ ಮತದಾನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಲು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಿರುಗುಪ್ಪ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಇಂದು ಸಿರುಗುಪ್ಪ ತಾಲ್ಲೂಕಿನ ವಿವಿಧೆಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸೋಮವಾರದಂದು, ಸಿರುಗುಪ್ಪ ತಾಲೂಕಿನ ಕುಡುದರಹಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಲಾಪುರ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಮನೋಹರ ಅವರು ಭೇಟಿ ನೀಡಿ, ಈ ಬಾರಿಯ ಲೋಕಸಭೆ ಚುನಾವಣೆಗೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡುವುದು ತಮ್ಮ ಆದ್ಯ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು. ಮತದಾನ ಪ್ರಕ್ರಿಯೆಯಿಂದ ಯಾವೊಬ್ಬ ವ್ಯಕ್ತಿಯು ಕೂಡ ಹೊರಗುಳಿಯಬಾರದು. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಕೆಲಸದ ಸ್ಥಳದಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇರುವ ಟೀ-ಶರ್ಟ್, ಟವೆಲ್ ಹಾಘೂ ಇನ್ನೀತರೆ ವಸ್ತ್ರ ಧರಿಸಬಾರದು ಎಂದು ಮನವರಿಕೆ ಮಾಡಿದರು. ನರೇಗಾ ಯೋಜನೆಯಡಿ ನಿಯಮಾನುಸಾರ ಕೂಲಿ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಬೇಕು. ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಪ್ರತ್ಯೇಕವಾಗಿ ಎನ್‍ಎಂಆರ್ ಸೃಜನೆ ಮಾಡಿ ಕೆಲಸ ನೀಡಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ ವರ್ಷದ ಕೂಲಿ ಮೊತ್ತ ರೂ.349 ಹೆಚ್ಚಳವಾಗಿದ್ದು, ಅಳತೆಗೆ ತಕ್ಕಂತೆ ಕೆಲಸ ನಿರ್ವಹಣೆ ಮಾಡಿದರೆ ಮಾತ್ರ ಒಂದು ದಿನದ ಪೂರ್ಣ ಪ್ರಮಾಣದ ಕೂಲಿಯು ಲಭ್ಯವಾಗುತ್ತದೆ. ಎನ್‍ಎಂಎಂಎಸ್ ಆಪ್ ಮೂಲಕವೇ ಹಾಜರಾತಿ ತೆಗೆದುಕೊಳ್ಳಲಾಗುತ್ತದೆ ಎಂದರು. ಕೂಲಿಕಾರರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕರೆತರದೇ, 06 ತಿಂಗಳಿಂದ 03 ವರ್ಷದೊಳಗಿನ ಮಕ್ಕಳನ್ನು ಕೂಸಿನ ಮನೆಯಲ್ಲಿಯೇ ಇರಿಸಬೇಕು. ಅಲ್ಲಿ ಪೌಷ್ಠಿಕ ಆಹಾರ, ಆಟೋಪಚಾರ ನೀಡಲಾಗುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕುಡುದರಹಾಳ್ ಗ್ರಾಪಂ ಪಿಡಿಓ ಲಿಂಗಯ್ಯ ಸ್ವಾಮಿ, ತಾಂತ್ರಿಕ ಸಹಾಯಕ ಅನುದೀಪ್, ಬಿಎಫ್‍ಟಿ ವಿರೇಶಪ್ಪ, ಡಿಇಓ ಬಡೇಸಾಬ್, ಗ್ರಾಮ ಕಾಯಕ ಮಿತ್ರ ಭೀಮಮ್ಮ ಸೇರಿದಂತೆ, ಪಂಚಾಯತ್ ಸಿಬ್ಬಂದಿಗಳು ಮತ್ತು 426 ಕೂಲಿಕಾರ್ಮಿಕರು ಹಾಜರಿದ್ದರು. ಸಿರುಗುಪ್ಪ ತಾಲ್ಲೂಕಿನ ಕೊಂಚಗೇರಿ, ಕೆ.ಸೂಗೂರು, ಶಾನವಾಸಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ ಸ್ಥಳಗಳಲ್ಲಿ ಗ್ರಾಮ ಕಾಯಕ ಮಿತ್ರರು-ಮೇ 07 ರಂದು ನಡೆಯುವ ಮತದಾನ ದಿನದಂದು ತಪ್ಪದೇ ಮತದಾನ ಮಾಡಬೇಕು. ಯಾರೂ ತಪ್ಪಿಸಬಾರದು ಎಂದು ಮತದಾನದ ಕುರಿತು ಅರಿವು ಮೂಡಿಸಲಾಯಿತು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ