ಬುಧವಾರ, ಜುಲೈ 24, 2024

‘ಭಾರತೀಯ ನ್ಯಾಯ ಸಂಹಿತೆ ೨೦೨೩’ರ ಒಂದು ದಿನದ ಕಾರ್ಯಗಾರ

ಬಳ್ಳಾರಿ,ಜು.೨೪(ಕರ್ನಾಟಕ ವಾರ್ತೆ): ಕೇಂದ್ರ ಸಂವಹನ ಇಲಾಖೆ, ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯ ಮತ್ತು ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿಎಸ್ ಲಾ ಕಾಲೇಜು ಸಭಾಂಗಣದಲ್ಲಿ ಬುಧವಾರದಂದು ‘ಭಾರತೀಯ ನ್ಯಾಯ ಸಂಹಿತೆ ೨೦೨೩’ ರ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು. ವಿಎಸ್ ಲಾ ಕಾಲೇಜಿನ ಅಧ್ಯಕ್ಷ ನರೇಂದ್ರ ಬಾಬು ಅವರು ಕಾರ್ಯಾಗಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ಬಗ್ಗೆ ಕಾರ್ಯಾಗಾರ ನಡೆಯುವುದರಿಂದ ಕಾನೂನು ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾಗಲಿದೆ ಎಂದು ಹೇಳಿದರು ವಿಎಸ್ ಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ರಂಜನಿ ಕುಮಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸಂವಹನ ಇಲಾಖೆಯ ಜಾಗೃತಿ ಕಾರ್ಯಕ್ರಮ ತುಂಬಾ ಉಪಯುಕ್ತವಾಗಿದೆ ಎಂದು ಹೇಳಿದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲರಾದ ಗುರು ಬಸವರಾಜ ಅವರು ‘ಭಾರತೀಯ ನ್ಯಾಯ ಸಂಹಿತೆ ೨೦೨೩’ ರ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಇನ್ನೊರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ದೂರದರ್ಶನದ ನಿವೃತ್ತ ಉಪ ನಿರ್ದೇಶಕ ಡಾ.ಕೆ.ಸುಧಾಕರ್ ರಾವ್ ಅವರು ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕಾನೂನುಗಳು ಇಡೀ ನ್ಯಾಯ ವ್ಯವಸ್ಥೆಗೆ ಕಾಯಕಲ್ಪ ನೀಡಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಗೀತ ಮತ್ತು ನಾಟಕ ವಿಭಾಗದ ನೇತ್ರ ಕಲಾ ಸಂಘ ಸಿರುಗುಪ್ಪ ತಂಡದಿಂದ ಜಾಗೃತಿ ಗೀತೆ ಹಾಗೂ ಮೂರು ಹೊಸ ಕಾನೂನುಗಳ ಬಗ್ಗೆ ನಾಟಕದ ಮೂಲಕ ಪ್ರದರ್ಶನ ನೀಡಿ ಜಾಗೃತಿಗೊಳಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ಎನ್.ರಾಮಕೃಷ್ಣ, ವಕೀಲರಾದ ಜಿ.ನೀಲನಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಟಿ ರುದ್ರಪ್ಪ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಚಂದ್ರಿಕಾ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ