ಬುಧವಾರ, ಫೆಬ್ರವರಿ 19, 2025

ಬಳ್ಳಾರಿ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣಪ್ಪ ಭೇಟಿ ಹಾಗೂ ಪರಿಶೀಲನೆ

ಬಳ್ಳಾರಿ,ಫೆ.19(ಕರ್ನಾಟಕ ವಾರ್ತೆ): ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಕೃಷ್ಣಪ್ಪ ಹಾಗೂ ಸದಸ್ಯರು ಒಳಗೊಂಡ ತಂಡವು ಸೋಮವಾರದಿಂದ ಬಳ್ಳಾರಿ ಜಿಲ್ಲೆಗೆ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು. ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಆಹಾರ ನಾಗರಿಕ ಸರಬರಾಜು ನಿಗಮದ ಸಗಟು ಗೋದಾಮುಗಳ ತಪಾಸಣೆ, ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣೆ ಕಾರ್ಯ, ಪಡಿತರ ವಿತರಣೆ ಸಮರ್ಪಕವಾಗಿ ವಿತರಿಸಿರುವ ಬಗ್ಗೆ ಫಲಾನುಭವಿಗಳ ಮನೆ-ಮನೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಗಳ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಆಹಾರ ಗುಣಮಟ್ಟ, ಸ್ವಚ್ಚತೆ ಮತ್ತು ನೈರ್ಮಲ್ಯತೆ ಹಾಗೂ ವಿಧ್ಯಾರ್ಥಿಗಳಿಗೆ ಬೇಕಾದ ಅಗತ್ಯ ಸಾಮಾಗ್ರಿಗಳ ಕುರಿತು ಪರಿಶೀಲಿಸಿದರು. ಕಾನೂನು ಮಾಪನ ಶಾಸ್ತç ಇಲಾಖೆಯಡಿಯ ಪೆಟ್ರೋಲ್ ಬಂಕ್ ತಪಾಸಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬಳ್ಳಾರಿ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ, ಸ್ವಚ್ಚತೆ ಮತ್ತು ನೈರ್ಮಲ್ಯತೆ ಕುರಿತು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಿಮ್ಸ್ ಆಸ್ಪತ್ರೆ ಮುಖ್ಯಸ್ಥರೊಂದಿಗೆ ಬಾಣಂತಿಯರಿಗೆ ನೀಡುವ ಎಲ್ಲಾ ರೀತಿಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲೂಕುಗಳ ಸಗಟು ಗೋದಾಮುಗಳಿಗೆ ಮತ್ತು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಂತರ ಬಳ್ಳಾರಿ ನಗರದ ವಿವಿಧ ಹೋಟೆಲ್‌ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಚತೆ ಮತ್ತು ನೈರ್ಮಲ್ಯತೆ ಪರಿಶೀಲನೆ ನಡೆಸಿದರು. ಈ ಸಂದರ್ಭಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸಕೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಸೇರಿದಂತೆ ಇತರರು ಇದ್ದರು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ