ಗುರುವಾರ, ಸೆಪ್ಟೆಂಬರ್ 18, 2025

ವ್ಯವಸ್ಥಿತ ಕಸ ಸಂಗ್ರಹಕ್ಕೆ ಕ್ಯೂಆರ್ ಕೋಡ್;ಬಳ್ಳಾರಿಯಲ್ಲಿ ಹೊಸ ಪ್ರಯೋಗ | ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಕರೆ

ಬಳ್ಳಾರಿ,ಸೆ.18(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸೆ.17 ರಿಂದ ಅ.02 ರವರೆಗೆ ಸರ್ಕಾರದ ನಿರ್ದೇಶನದಂತೆ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ಬಳ್ಳಾರಿ, ತಾಲ್ಲೂಕು ಪಂಚಾಯತ್ ಬಳ್ಳಾರಿ ಹಾಗೂ ಗ್ರಾಮ ಪಂಚಾಯತ್ ಕಪ್ಪಗಲ್ಲು ಮತ್ತು ಮೋಕ ಸಹಭಾಗಿತ್ವದಲ್ಲಿ ಕಪ್ಪಗಲ್ಲು ಮತ್ತು ಮೋಕ ಗ್ರಾಮಗಳಲ್ಲಿ ಸ್ವಚ್ಛತೆ ಕೈಗೊಳ್ಳುವ ಮೂಲಕ ಗುರುವಾರ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೈರ್ ಅವರು ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ, ಸ್ವಚ್ಛತಾ ಕಾರ್ಯವು ತುಂಬಾ ಮಹತ್ತರ ಕಾರ್ಯವಾಗಿದ್ದು, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ವೈಯಕ್ತಿಕ ಸ್ವಚ್ಛತೆ, ಗ್ರಾಮದ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಜಲಮೂಲಗಳ ಸುತ್ತ ಸ್ವಚ್ಛತೆ ಕಾಯ್ದುಕೊಳ್ಳುವಿಕೆ ಕುರಿತು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಮಾತನಾಡಿ, ಸಾರ್ವಜನಿಕರು ಸ್ವಚ್ಛತೆ ಮತ್ತು ಶುಚಿತ್ವದ ಬಗ್ಗೆ ಅರಿವು ಹೊಂದಬೇಕು. ಇದರಿಂದ ಯಾವುದೇ ರೋಗ-ರುಜಿನಗಳು ಹತ್ತಿರ ಸುಳಿಯುವುದಿಲ್ಲ ಎಂದರು. *ಕಸ ಕ್ಯೂಆರ್ ಕೋಡ್:* ಗ್ರಾಮೀಣ ಪ್ರದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಪ್ರತಿ ನಿತ್ಯ ಮನೆಯ ಹಂತದಲ್ಲಿ ಕಸ ಸಂಗ್ರಹಣೆ ಮತ್ತು ಇದನ್ನು ಜಿಲ್ಲಾ ಹಂತದಲ್ಲಿ ಪರಿಶೀಲನೆ ನಡೆಸಲು ಪ್ರಾಯೋಗಿಕವಾಗಿ ಮೋಕ ಮತ್ತು ಕಪ್ಪಗಲ್ಲು ಗ್ರಾಮ ಪಂಚಾಯತಿಗಳಲ್ಲಿ ಕಸ ಕ್ಯೂಆರ್ ಕೋಡ್ ಆಪ್ ಬಿಡುಗಡೆಗೊಳಿಸಲಾಯಿತು. ಸಮರ್ಪಕ ತ್ಯಾಜ್ಯ ವಿಲೇವಾರಿ ಮಾಡಲು ಕಸ ಕ್ಯೂಆರ್ ಕೋಡ್ ಅಳವಡಿಸಲು ಜಿಪಂ ಚಿಂತನೆ ನಡೆಸಿದ್ದು, ಈಗಾಗಲೇ ಯೋಜನೆ ರೂಪಿಸಲಾಗಿದೆ. ಪ್ರಾಯೋಗಿಕವಾಗಿ ಮೋಕ ಮತ್ತು ಕಪ್ಪಗಲ್ಲು ಗ್ರಾಮಗಳಲ್ಲಿ ಜಾರಿಗೊಳಿಸಲಾಗಿದೆ. ಈ ಕ್ಯೂಆರ್ ಕೋಡ್ ಅನ್ನು ಪ್ರತಿ ನಿತ್ಯ ಸ್ಕಾö್ಯನ್ ಮಾಡಿದಾಗ ವಾರ್ಡ್ವಾರು ವಾಹನ ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸುವ ಕುರಿತು ಪರಿಶೀಲನೆ ನಡೆಸಲು ಅನುಕೂಲವಾಗಲಿದೆ. ಪ್ರಾಯೋಗಿಕ ಹಂತದ ಈ ಗ್ರಾಮ ಪಂಚಾಯತಿಗಳಲ್ಲಿ ಯಶಸ್ವಿಯಾದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಸ ಕ್ಯೂಆರ್ ಕೋಡ್ ಗಳನ್ನು ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್ ಅವರು ತಿಳಿಸಿದರು. ಇದೇ ವೇಳೆ ಕಸ ಕ್ಯೂಆರ್ ಕೋಡ್ ಆಪ್ ಮತ್ತು ಸ್ವಚ್ಛತಾ ಕಾರ್ಯದ ಕುರಿತ ಮಾಹಿತಿ ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ ಬಾರಿಕರ್ ಸೇರಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಇತರರು ಹಾಜರಿದ್ದರು. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ