ಮಂಗಳವಾರ, ಅಕ್ಟೋಬರ್ 14, 2025
ಅ.23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅರ್ಥಪೂರ್ಣ ಆಚರಣೆ | ಮಹನೀಯರ ಕೊಡುಗೆ ತಿಳಿಸುವ ಕಾರ್ಯವಾಗಲಿ: ಎಡಿಸಿ ಮಹಮ್ಮದ್ ಝುಬೇರ್
ಬಳ್ಳಾರಿ,ಅ.14(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅ.23 ರಂದು ಬೆಳಿಗ್ಗೆ 11ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಅAದು ಬೆಳಿಗ್ಗೆ 09.30 ಗಂಟೆಗೆ ಜಯಂತಿಯ ಅಂಗವಾಗಿ ಮುನಿಸಿಪಲ್ ಕಾಲೇಜು ಮೈದಾನದಿಂದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಜಯಂತಿಯ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ವೇದಿಕೆ ಕಾರ್ಯಕ್ರಮದಲ್ಲಿ ವಚನ ಗಾಯನ ಇರಲಿದೆ ಎಂದರು.
ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚೆನ್ನಮ್ಮನವರ ಕೊಡುಗೆ ಅಪಾರ. ಅಂತಹ ಮಹನೀಯರ ಆಚಾರ-ವಿಚಾರ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ. ಹಾಗಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಎಲ್ಲಾ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ