ಸೋಮವಾರ, ಡಿಸೆಂಬರ್ 29, 2025

ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಅಭಿಮತ | ಕುವೆಂಪು ಸಾಹಿತ್ಯ ಲೋಕದ ಅದಮ್ಯ ಚೇತನ

ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟçಕವಿ ಕುವೆಂಪು ಅವರು ವಿಶ್ವ ಮಾನವ ಸಂದೇಶ ಸಾರುವ ಮೂಲಕ ಕನ್ನಡ ಸಾಹಿತ್ಯ ಲೋಕದ ಅದಮ್ಯ ಚೇತನವಾಗಿದ್ದರು ಎಂದು ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟçಕವಿ ಕುವೆಂಪು ಜನ್ಮದಿನ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕವಿಗಳು ಸುಂದರ ಪ್ರಕೃತಿಯ ಮೂಲಕ ಸೂರ್ಯೋದಯ ಮತ್ತು ಸೂರ್ಯಸ್ಥಮಾನದಲ್ಲಿ ಸಾಹಿತ್ಯ ಕೃತಿಗಳನ್ನು ಬರೆಯುತ್ತಿದ್ದರು. ಕುವೆಂಪು ಅವರು ಸಹ ಪ್ರಕೃತಿಯ ವರ್ಣನೆಯಿಂದ ಸಮಾಜ ಪರಿವರ್ತನೆ ಮಾಡಿದವರು ಎಂದು ತಿಳಿಸಿದರು. ಕುವೆಂಪು ಅವರು 1904 ಡಿಸೆಂಬರ್ 29 ರಂದು ತಂದೆ ವೆಂಕಟಪ್ಪ ತಾಯಿ ಸೀತಮ್ಮ ಮಗನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಜನಿಸಿದ್ದರು. ಕುವೆಂಪು ಅವರು ದೇಶದಲ್ಲಿ ಎಲ್ಲಾ ಧರ್ಮ ಸೌಹರ್ದತೆಯಿಂದ ಬಾಳಬೇಕು. ವಿಭಿನ್ನತೆಯಲ್ಲಿ ಏಕತೆ ಹೊಂದಿ ಧರ್ಮ, ಸಂಸ್ಕೃತಿ, ಆಚಾರ-ವಿಚಾರ, ಜಾತಿಗಳಿಂದ ದೂರವಿದ್ದು ವಿಶ್ವ ಮಾನವನಾಗಬೇಕು ಎಂದು ಸಾರಿದವರು ಎಂದರು. ಈಗಿನ ಪೀಳಿಗೆ ಆದರ್ಶ ವ್ಯಕ್ತಿಗಳ ಜೀವನಾಧಾರಿತ ಪುಸ್ತಕಗಳಿಂದ ಉತ್ತಮ ಆದರ್ಶಗಳನ್ನು ಬೆಳೆಸಿಕೊಂಡು ಕುವೆಂಪು ರಂತೆ ಉತ್ತಮ ಹೆಸರನ್ನು ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಬುದ್ಧ, ಬಸವಣ್ಣರಂತಹ ವಿಶ್ವ ಮಾನವರ ಸಾಲಿನಲ್ಲಿ ಕುವೆಂಪು ಅವರು ಒಬ್ಬರು. ಅವರ ‘ಓ ನನ್ನ ಚೇತನ ಆಗು ನೀ ಅನಿಕೇತನ' ಕವನದಲ್ಲಿ ಎಲ್ಲರು ವಿಶ್ವಮಾನವರಾಗಬೇಕು ಎಂಬ ತತ್ವ ಅಡಗಿತ್ತು. ಜಾತಿ, ಮತ, ಧರ್ಮ ಎಲ್ಲವನ್ನೂ ಮೀರಿ ಬದುಕಬೇಕು ಎಂದು ಸಾರಿದವರು ಕುವೆಂಪು ಎಂದು ಹೇಳಿದರು. ಆಕಾಶವಾಣಿ ಉದ್ಘೋಷಕ ಅಮಾತಿ ಬಸವರಾಜ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸಾಂಸಾರಿಕ ಜೀವನದಲ್ಲಿ ಆಧ್ಯಾತ್ಮಿಕ ಗುರಿ ಸಾಧಿಸಿದವರು ಕುವೆಂಪು. ಕೌಟುಂಬಿಕ ಜೀವನಕ್ಕೆ ಮಹತ್ವ ಕೊಟ್ಟಿದ್ದರೂ ಅವರಿಗೆ ಆಧ್ಯಾತ್ಮಿಕತೆಯ ಬಗ್ಗೆ ಓಲವಿತ್ತು. ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರ ಮಾರ್ಗದಲ್ಲಿ ಆಧ್ಯಾತ್ಮಿಕ ಯಶಸ್ಸು ಸಾಧಿಸಿದವರು ಎಂದು ಹೇಳಿದರು. ಕುವೆಂಪು ಅವರ ಕನ್ನಡ ಸಾಹಿತ್ಯವನ್ನು ಗ್ರಹಿಸಲಾರದಷ್ಟು ಎತ್ತರಕ್ಕೆ ಬೆಳೆಸಿದ್ದಾರೆ. ಅನೇಕ ಚಳವಳಿಗಳಿಗೆ ಅವರೇ ಸ್ಪೂರ್ತಿಯಾಗಿದ್ದರು ಮತ್ತು ಅವರ ಮುಖ್ಯ ವಿಚಾರಧಾರೆಯಾದ ಮನುಜಮತ-ವಿಶ್ವಪಥ, ಸರ್ವೋದಯ-ಸಮನ್ವಯ ಪೂರ್ಣದೃಷ್ಟಿಯನ್ನು ಕುರಿತು ತಿಳಿಸಿಕೊಟ್ಟವರು ಎಂದರು. ಇಪ್ಪತ್ತನೇಯ ಶತಮಾನ ಕಂಡ ದೈತ್ಯ ಪ್ರತಿಭೆ ವರಕವಿ ದ.ರಾ.ಬೇಂದ್ರೆಯವರಿAದ ‘ಯುಗದ ಕವಿ ಜಗದ ಕವಿ' ಎನಿಸಿಕೊಂಡವರು ಕುವೆಂಪು. ಕನ್ನಡದ ಎರಡನೇಯ ರಾಷ್ಟçಕವಿ. ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಕನ್ನಡಕ್ಕೆ ತಂದುಕೊಟ್ಟವರು ಕುವೆಂಪು ಎಂದು ಅವರು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಜಡೇಶ್ ಎಮ್ಮಿಗನೂರು ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪೀಠಿಕೆ ಭೋದಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರ ಬಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಉಪ ನಿರ್ದೇಶಕ ಚೋರನೂರು ಕೊಟ್ರಪ್ಪ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ