ಮಂಗಳವಾರ, ಫೆಬ್ರವರಿ 10, 2026
ಮಕ್ಕಳಿಗೆ ತಪ್ಪದೇ ಜಂತುಹುಳು ನಿವಾರಕ ಮಾತ್ರೆ ನೀಡಿ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ):
01 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಪ್ರತಿ 06 ತಿಂಗಳಿಗೊಮ್ಮೆ ತಪ್ಪದೇ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಆರೋಗ್ಯ ಕೇಂದ್ರ ಬಂಡಿಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಂಡಿಹಟ್ಟಿ ವ್ಯಾಪ್ತಿಯ ಪಿ.ಎಮ್.ಶ್ರೀ ಕೇಂದ್ರಿಯ ವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮುದಾಯ ಆಧಾರಿತ ಜಂತುಹುಳು ನಿವಾರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರಂಭದಲ್ಲಿಯೇ ರಕ್ತಹೀನತೆಯನ್ನು ಗುರ್ತಿಸುವುದರಿಂದ ಮಕ್ಕಳಲ್ಲಿ ಕಂಡುಬರಬಹುದಾದ ದೇಹದ ಬೆಳವಣಿಗೆಯ ಕುಂಠಿತ ತೊಂದರೆಗಳು ಹಾಗೂ ರಕ್ತಹೀನತೆಯಿಂದ ಉಂಟಾಗಬಹುದಾದ ಇತರೆ ಸಾಮಾನ್ಯ ತೊಂದರೆಗಳನ್ನು ಸಹಿತ ಆರಂಭದಲ್ಲಿಯೇ ಗುರ್ತಿಸಿ ಮಗುವಿನ ಬಾಲ್ಯವನ್ನು ಸದೃಢಗೊಳಿಸಲು ಜಂತುಹುಳು ನಿವಾರಣಾ ಮಾತ್ರೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಈ ದಿಶೆಯಲ್ಲಿ 01 ರಿಂದ 02 ವರ್ಷದೊಳಗಿನ ಮಕ್ಕಳಿಗೆ 200 ಮಿಲಿಗ್ರಾಮ್ ಮಾತ್ರೆಗಳನ್ನು ಹಾಗೂ 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 400 ಮಿಲಿಗ್ರಾಮ್ ಮಾತ್ರೆಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಣಾ ಮಾತ್ರೆಯನ್ನು ಶಾಲಾ ಶಿಕ್ಷಕರು, ಆರೋಗ್ಯ ಸಿಬ್ಬಂದಿ ಸಮ್ಮುಖದಲ್ಲಿಯೇ ಮಗುವಿಗೆ ಚೀಪಲು ಕೊಡಲಾಗುತ್ತಿದ್ದು, ಎಲ್ಲಾ ಪಾಲಕರು ಇದರ ಸದುಪಯೋಗ ಪಡೆದುಕೊಂಡು ಮಗುವಿನ ಆರೋಗ್ಯಕ್ಕೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆಯಾದಂತೆ ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತಾ ಹೋಗುತ್ತದೆ. ಸಣ್ಣಪುಟ್ಟ ಕಾಯಿಲೆಗಳು ಸಹ ದೀರ್ಘಾವಧಿಯವರೆಗೆ ಕಾಡುತ್ತವೆ. ಮುಖ್ಯವಾಗಿ ಹೆಣ್ಣುಮಗುವಿನಲ್ಲಿ ರಕ್ತಹೀನತೆ ಸತತವಾಗಿ ಮುಂದುವರೆದಲ್ಲಿ ಹದಿಹರೆಯದ ಸಮಸ್ಯೆಗಳು ಗಂಭೀರ ಸ್ವರೂಪ ಪಡೆಯುತ್ತವೆ. ಹಾಗಾಗಿ ಹೆಣ್ಣು ಮಕ್ಕಳು ಸ್ವಚ್ಛತೆಯ ಕುರಿತು ಹೆಚ್ಚು ಪ್ರಾಮುಖ್ಯತೆ ನೀಡಲು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಹನುಮಂತಪ್ಪ, ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಲ್ಲಿ ಮತ್ತು ನಗರ, ಪಟ್ಟಣಗಳಲ್ಲಿ ಮಾತ್ರೆಗಳನ್ನು ವಿತರಿಸಲು ಕ್ರಮವಹಿಸಲಾಗಿದ್ದು, ಫೆ.10 ರಂದು ಮಾತ್ರೆಗಳನ್ನು ಪಡೆಯದೇ ಉಳಿದಿರುವ ಮಕ್ಕಳು ಮಾಪ್ ಅಪ್ ದಿನ ಫೆ.16 ರಂದು ಪಡೆಯಲು ವಿನಂತಿಸಿದರು.
ಜಿಲ್ಲೆಯಲ್ಲಿ 471595 ಮಕ್ಕಳಿಗೆ ಜಂತುಹುಳು ನಿವಾರಕ ಆಲ್ಬಂಡೋಜೋಲ್ ಮಾತ್ರೆಗಳನ್ನು ಆರೋಗ್ಯ ಸಿಬ್ಬಂದಿ ವಿತರಿಸಲಿದ್ದಾರೆ. ಜಂತುಹುಳು ನಿವಾರಣಾ ಮಾತ್ರೆ (ಅಲ್ಬೆಂಡಾಜೋಲ್) ಯನ್ನು 1-19 ವರ್ಷ ವಯಸ್ಸಿನ ಮಕ್ಕಳಿಗೆ ಖಾಸಗಿ, ಸರ್ಕಾರಿ ಶಾಲೆ, ಎಲ್ಲಾ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. ಮಗುವಿಗೆ ಯಾವುದೇ ಕಾರಣಕ್ಕೂ ನುಂಗಿಸದೆ ಮಾತ್ರೆಗಳನ್ನು ಚೀಪಿಸಲು ಆದ್ಯತೆ ನೀಡಬೇಕು ಎಂದು ವಿನಂತಿಸಿದರು.
ಕಾರ್ಯಕ್ರದಲ್ಲಿ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ವೀರೇಂದ್ರ ಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಯಾಸ್ಮಿನ್, ಪಿ.ಎಮ್.ಶ್ರೀ ಕೇಂದ್ರೀಯ ವಿದ್ಯಾಲಯ ಪ್ರಾಂಶುಪಾಲ ಪ್ರತಾಪ್ ಸಿಂಗ್, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಡಿಎನ್ಒ ಗಿರೀಶ್, ಆರ್.ಕೆ.ಎಸ್.ಕೆ ಸಲಹೆಗಾರ ಮನೋಹರ್, ತಾಲ್ಲೂಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಹಿರಿಯ ಆರೋಗ್ಯ ಪ್ರಾಥಮಿಕ ಸುರಕ್ಷಾಧಿಕಾರಿ ಗಂಗಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಲಿಂಗ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೊಗ್ಯ ಇಲಾಖೆ ಸಿಬ್ಬಂದಿ, ಶಾಲಾ ಬೋಧಕ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)






ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ