ಗುರುವಾರ, ಜೂನ್ 18, 2026
ಶಾಲಾ ಅಭಿವೃದ್ಧಿಗೆ ಶಾಸಕ ಬಿ. ನಾಗೇಂದ್ರ ಅವರಿಂದ ತಲಾ 10 ಲಕ್ಷ ರೂ. ಅನುದಾನ: ಜೂನ್ 19 ರಂದು ದತ್ತು ಸ್ವೀಕಾರ ಕಾರ್ಯಕ್ರಮ
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಮಹತ್ತರ ಹೆಜ್ಜೆ ಇಟ್ಟಿದ್ದಾರೆ. ತಮ್ಮ ಶಾಸಕರ ನಿಧಿಯಿಂದ ಕ್ಷೇತ್ರದ ಎರಡು ಸರ್ಕಾರಿ ಶಾಲೆಗಳ ಸಂಪೂರ್ಣ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು, ಜೂನ್ 19 ರಂದು ಈ ಶಾಲೆಗಳನ್ನು ದತ್ತು ಪಡೆಯುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಗೆ ಒಳಪಡುವ ಎತ್ತಿನಬೂದಿಹಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪಶ್ಚಿಮ ವಲಯದ ವ್ಯಾಪ್ತಿಗೆ ಒಳಪಡುವ ಬಂಡಿಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಶಾಸಕರ ಈ ವಿಶೇಷ ಅನುದಾನಕ್ಕೆ ಪಾತ್ರವಾಗಿವೆ.
*ಜೂನ್ 19 ರಂದು ಕಾರ್ಯಕ್ರಮ:*
ಈ ಎರಡೂ ಶಾಲೆಗಳನ್ನು ಶಾಸಕರು ಸಂಪೂರ್ಣವಾಗಿ ದತ್ತು ಪಡೆಯಲಿದ್ದು, ಈ ನಿಮಿತ್ತ ಜೂನ್ 19 ರಂದು ಎತ್ತಿನಬೂದಿಹಾಳು ಮತ್ತು ಬಂಡಿಹಟ್ಟಿ ಗ್ರಾಮಗಳಲ್ಲಿ ದತ್ತು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
*ಕೃತಜ್ಞತೆ ಸಲ್ಲಿಕೆ:*
ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ದೊಡ್ಡ ಮೊತ್ತದ ಧನಸಹಾಯ ನೀಡಿ, ಶಾಲೆಗಳನ್ನು ದತ್ತು ಪಡೆಯುತ್ತಿರುವ ಶಾಸಕ ಬಿ.ನಾಗೇಂದ್ರ ಅವರಿಗೆ ಬಳ್ಳಾರಿ ಪೂರ್ವ ಮತ್ತು ಪಶ್ಚಿಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಎಸ್ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಜಂಟಿಯಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ