ಶುಕ್ರವಾರ, ಜೂನ್ 12, 2026

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು | ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು

ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ): ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ ಮಗುವಿಗೂ ಮೂಲಭೂತ ಶಿಕ್ಷಣ ಪಡೆಯುವ ಹಕ್ಕಿದೆ. ಇದನ್ನು ಯಾವುದೇ ಕಾರಣಕ್ಕೂ ಯಾರು ಕಸಿದುಕೊಳ್ಳಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗ ಪ್ರಭು ಅವರು ಹೇಳಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು. ಸಂವಿಧಾನದಡಿ ಪ್ರತಿಯೊಬ್ಬ ಮಗುವಿಗೂ ವಿದ್ಯಾಭ್ಯಾಸ ಪಡೆಯುವ ಮೂಲಭೂತ ಹಕ್ಕನ್ನು ನೀಡಲಾಗಿದೆ. ಬಾಲಕಾರ್ಮಿಕ ಪದ್ಧತಿಯನ್ನು ತಡೆಯಲು ಮತ್ತು ಮಕ್ಕಳಿಗೆ ಶಿಕ್ಷಣ ಒದಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಡಿ ಪ್ರತಿ ಮಗುವಿಗೂ ಕಡ್ಡಾಯವಾಗಿ ಮೂಲಭೂತ ಶಿಕ್ಷಣ ಸಿಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಮತ್ತು ಸಮಾಜದ ಕರ್ತವ್ಯವಾಗಿದೆ ಎಂದು ತಿಳಿಸಿದರು. ಹಿಂದಿನ ದಿನಗಳಿಗೆ ಹೋಲಿಸಿದರೆ ಪ್ರಸ್ತುತ ದಿನಗಳಲ್ಲಿ ಬಾಲಕಾರ್ಮಿಕ ಪದ್ಧತಿ ಗಣನೀಯವಾಗಿ ಕಡಿಮೆಯಾಗಿದೆ. ಆದಾಗ್ಯೂ, ಇದು ಸಮಾಜದಿಂದ ಸಂಪೂರ್ಣವಾಗಿ ತೊಲಗಿಲ್ಲ. ಇಂದಿಗೂ ಸಮಾಜದ ಕೆಲವು ಮೂಲೆಗಳಲ್ಲಿ, ಕಣ್ಣಿಗೆ ಕಾಣಿಸದಂತೆ ಅಥವಾ ಕಾನೂನಿನ ಕಣ್ಣು ತಪ್ಪಿಸಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅಂತಹ ಜಾಗಗಳನ್ನು ಗುರುತಿಸಿ, ಅಲ್ಲಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಬೇಕು. ತದನಂತರ ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಮುಖ್ಯ ಉದ್ದೇಶವಾಗಬೇಕು ಎಂದು ಅವರು ಕರೆ ನೀಡಿದರು. ನಾಗರಿಕರು ಕೇವಲ ಸರ್ಕಾರದ ಉದ್ಯೋಗಗಳ ಮೇಲಷ್ಟೇ ಅವಲಂಬಿತರಾಗದೆ, ಸರ್ಕಾರದ ವಿವಿಧ ಸ್ವಯಂ-ಉದ್ಯೋಗ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆ ಮೂಲಕ ತಾವೇ ಸ್ವಾವಲಂಬಿಗಳಾಗಿ, ಸಮಾಜದಲ್ಲಿ ಘನತೆಯಿಂದ ಬದುಕುವಂತಾಗಬೇಕು ಎಂದು ಆಶಿಸಿದರು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯು ಕೈಗಾರಿಕೆಗಳು, ಇಟ್ಟಿಗೆ ಭಟ್ಟಿಗಳು ಹಾಗೂ ಬಿಡಿ ಕಾರ್ಮಿಕ ವಲಯಗಳಲ್ಲಿ ಗಮನಾರ್ಹವಾಗಿ ಗುರುತಿಸಿಕೊಂಡಿದ್ದು, ಇಂತಹ ಸ್ಥಳಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಮಕ್ಕಳನ್ನು ಶಾಲೆ-ಕಾಲೇಜುಗಳಿಗೆ ಕಳುಹಿಸುವ ಬದಲು ಕಾರ್ಮಿಕರನ್ನಾಗಿ ಮಾಡಿಕೊಳ್ಳುತ್ತಿರುವುದು ತೀರಾ ವಿಷಾದನೀಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಕಳೆದ ವರ್ಷ ಕಾರ್ಮಿಕ ಇಲಾಖೆ ಒಳಗೊಂಡು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹತ್ತಾರು ಕಡೆಗಳಲ್ಲಿ ದಾಳಿ ನಡೆಸಿ, ಸುಮಾರು 58 ಬಾಲಕಾರ್ಮಿಕರನ್ನು ರಕ್ಷಿಸಿದೆ. ರಕ್ಷಿಸಲ್ಪಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಮೂಲಕ, ಅವರು ಸತ್ಪçಜೆಗಳಾಗಿ ಬೆಳೆಯಲು ನೆರವಾಗುವಂತಹ ಶ್ಲಾಘನೀಯ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು. 14 ರಿಂದ 18 ವರ್ಷದೊಳಗಿನ ಯಾವುದೇ ಮಗು ಎಲ್ಲಾದರೂ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದರೆ, ತಕ್ಷಣ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳನ್ನು ರಕ್ಷಿಸುವುದು ಕೇವಲ ಇಲಾಖೆಯ ಕೆಲಸವಲ್ಲ, ಅದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅವರನ್ನು ಶಾಲೆ-ಕಾಲೇಜುಗಳಿಗೆ ಕಳುಹಿಸಿ, ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ವಿನಂತಿಸಿದರು. ಇದೇ ವೇಳೆ ಚಿಗುರು ಕಲಾ ತಂಡದ ಹುಲುಗಪ್ಪ ಸಂಗಡಿಗರಿAದ ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಬಳಿಕ ಶಾಲಾ ಮಕ್ಕಳು ಒಳಗೊಂಡ ಜಾಥಾವು ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ತೇರು ಬೀದಿ ಹಾಗೂ ಹೆಚ್.ಆರ್. ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ತಲುಪಿತು. ಮಾರ್ಗದುದ್ದಕ್ಕೂ ಮಕ್ಕಳ ಕೈಯಲ್ಲಿ ಜಾಗೃತಿ ಫಲಕಗಳು ರಾರಾಜಿಸಿದವು. ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ. ಖೈನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ ಎಂ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧೆ ನಂದಿನಿ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ನಿರೀಕ್ಷಕರಾದ ರಮೇಶ್(ಬಳ್ಳಾರಿ ವೃತ್ತ-1), ಪರಶುರಾಮ್(ಬಳ್ಳಾರಿ ವೃತ್ತ-2) ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಎನ್‌ಸಿಸಿ ಅಧಿಕಾರಿಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ